“ನಮ್ಮ ಗ್ರಾಮದಲ್ಲಿ ಯಾವ ಹೆಣ್ಣಿಗೂ ರಕ್ಷಣೆ ಇಲ್ಲ. ರಾತ್ರಿ ಎಂಟೊಂಬತ್ತು ಗಂಟೆ ಆದ ಮೇಲೆ ಅವರು ಮನೆಗಳನ್ನು ಬಿಟ್ಟು ಆಚೆ ಬರುವುದೇ ಇಲ್ಲ,” ಎಂದು ಶುಕ್ಲಾ ಘೋಷ್ ಹೇಳುತ್ತಾರೆ. ಇವರು ಪಶ್ಚಿಮ್ ಮೇದಿನಿಪುರದಲ್ಲಿ ಇರುವ ಕೌಪುರ ಎಂಬ ಗ್ರಾಮದ ಬಗ್ಗೆ ಹೇಳುತ್ತಿದ್ದಾರೆ. “ಹೆಣ್ಣು ಮಕ್ಕಳು ಭಯದಲ್ಲಿ ಬದುಕುತ್ತಿದ್ದಾರೆ. ಆದರೆ ಅವರಿಗೂ ಇದನ್ನು ವಿರೋಧಿಸಿ ಪ್ರತಿಭಟಿಸಬೇಕೆಂದು ಇದೆ,” ಎಂದು ಅವರು ಹೇಳುತ್ತಾರೆ.
ಕೌಪುರದಿಂದ ಬಂದಿರುವ ಘೋಷ್ ಮತ್ತು ಇತರ ಹುಡುಗಿಯರು ಪಶ್ಚಿಮ ಬಂಗಾಳದ ಊರು ಊರುಗಳಿಂದ, ಸಣ್ಣ ಸಣ್ಣ ಪಟ್ಟಣಗಳಿಂದ ಬಂದಿರುವ ಸಾವಿರಾರು ರೈತರು, ಕೃಷಿ ಕಾರ್ಮಿಕರು ಮತ್ತು ಕೆಲಸಗಾರರು ಕಳೆದ ವಾರ ರಸ್ತೆಗಳಿಗೆ ಇಳಿದಿದ್ದಾರೆ. ಇವರೆಲ್ಲರೂ ಆರ್. ಜಿ. ಕಾರ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಘಟನೆ ನಡೆದ 44 ದಿನಗಳ ನಂತರ, ಸೆಪ್ಟೆಂಬರ್ 21, 2024 ರಂದು ಮಧ್ಯ ಕೋಲ್ಕತ್ತಾದ ಕಾಲೇಜ್ ಸ್ಟ್ರೀಟ್ನಿಂದ ಪ್ರತಿಭಟನೆ ಆರಂಭವಾಗಿ ಮೂರ್ನಾಲ್ಕು ಕಿಲೋಮೀಟರ್ ದೂರದ ವರೆಗೆ ಶ್ಯಾಮ್ಬಜಾರ್ ಕಡೆಗೆ ಸಾಗಿತು.
ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳೆಂದರೆ: ಮರಣ ಹೊಂದಿರುವ ವೈದ್ಯೆಗೆ ತಕ್ಷಣ ನ್ಯಾಯ ನೀಡುವುದು, ತಪ್ಪಿತಸ್ಥರಿಗೆ ಕಠಿಣ ಶಕ್ಷೆ ನೀಡುವುದು, ಕೋಲ್ಕತ್ತಾದ ಪೊಲೀಸ್ ಆಯುಕ್ತರ ರಾಜೀನಾಮೆ (ವೈದ್ಯರು ನಡೆಸಿದ ಪ್ರತಿಭಟನೆಯಲ್ಲಿ ಮುಂದಿಡಲಾಗಿದ್ದ ಈ ಬೇಡಿಕೆಯನ್ನು ಸರ್ಕಾರ ಸ್ವೀಕರಿಸಿದೆ) ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗೃಹ ಮತ್ತು ಬೆಟ್ಟಗಾಡು ವ್ಯವಹಾರಗಳ ಖಾತೆಗಳನ್ನು ನಿಬಾಯಿಸುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ರಾಜೀನಾಮೆ ನೀಡುವುದು.












