70 ವರ್ಷ ಬಲದೇವ್ ಕೌರ್ ಅವರು ಒಂದು ಕಾಲದಲ್ಲಿ ತಮ್ಮ ಕುಟುಂಬವು ನಿರ್ಮಿಸಿದ್ದ ಮನೆಯ ಅವಶೇಷಗಳನ್ನು ಬದಿಗೆ ಸರಿಸುತ್ತಾ ದಾರಿ ಮಾಡಿಕೊಂಡರು. ಅಳಿದುಳಿದು ಬೀಳದೆ ನಿಂತ ಕೋಣೆಗಳ ಗೋಡೆಗಳಲ್ಲಿ ದೊಡ್ಡ ಬಿರುಕುಗಳು ಕಾಣುತ್ತಿದ್ದವು.
“ಜೋರು ಮಳೆ ಮತ್ತು ಆಲಿಕಲ್ಲು ಮನೆಯ ಛಾವಣಿಗೆ ಅಪ್ಪಳಿಸಿದ ದಿನ ನಾವೆಲ್ಲ ರಾತ್ರಿಯಿಡೀ ಎದ್ದು ಕುಳಿತಿದ್ದೆವು. ಹೊರಗೆ ಏನಾಗುತ್ತಿಯೆನ್ನುವುದರ ಕುರಿತು ನಮಗೆ ಸ್ಪಷ್ಟತೆ ಇದ್ದಿರಲಿಲ್ಲ.” ಎನ್ನುತ್ತಾರೆ ಬಲದೇವ್. ಬದುಕಿನ ದಾರಿಯಲ್ಲಿ ನಡೆದು ತಲೆ ಕೂದಲು ಬೆಳ್ಳಗಾಗಿರುವ ಈ ಹಿರಿಯ ಮಹಿಳೆ ಅಂದು ತನ್ನ ಕಾಟನ್ ದುಪ್ಪಟ್ಟಾವನ್ನು ತನ್ನ ತಲೆ ಹೊದ್ದು ನಮ್ಮೊಡನೆ ಮಾತನಾಡುತ್ತಿದ್ದರು. “ಆಮೇಲೆ ಬೆಳಗ್ಗೆ ಛಾವಣಿಯಿಂದ ನೀರು ಸೋರುತ್ತಿರುವುದನ್ನು ನೋಡಿ ನಾವೆಲ್ಲ ಹೊರಗೆ ಓಡಿದೆವು.”
ಸೂರ್ಯ ಮೇಲೇಳುತ್ತಿದ್ದ ಹಾಗೆ ಮನೆ ಕುಸಿಯಲು ಆರಂಭಿಸಿತು ಎಂದು ಅವರ ಕಿರಿಯ ಸೊಸೆ 26 ವರ್ಷದ ಅಮನ್ ದೀಪ್ ಕೌರ್ ಹೇಳಿದರು. “ಸಾರೆ ಪಾಸೆ ಘರ್ ಹೀ ಪಾಟ್ ಗಯಾ. [ನಮ್ಮ ಕಣ್ಣೆದುರೇ ಮನೆ ಕುಸಿದುಬಿತ್ತು]” ಎಂದರು ಬಲದೇವ್ ಅವರ ಹಿರಿಯ ಮಗನಾದ 36 ವರ್ಷ ಪ್ರಾಯದ ಬಲ್ಜಿಂದರ್ ಸಿಂಗ್.
ಬಲದೇವ್ ಕೌರ್ ಮತ್ತು ಅವರ ಮೂರು ಮಕ್ಕಳು ಸೇರಿದಂತೆ ಅವರ ಏಳು ಜನರ ಕುಟುಂಬವು ಹಿಂದೆಂದೂ ಇಂತಹ ದುರಂತವನ್ನು ಕಂಡಿರಲಿಲ್ಲ. 2023ರ ಮಾರ್ಚ್ ತಿಂಗಳಿನ ಕೊನೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಶ್ರೀ ಮುಕ್ತಸರ್ ಸಾಹಿಬ್ ಜಿಲ್ಲೆಯ ಗಿದ್ದರ್ಬಾಹಾ ಬ್ಲಾಕ್ ಭಲಾಹಿ ಆಣಾ ಗ್ರಾಮದಲ್ಲಿ ಬೆಳೆಗಳು ಮತ್ತು ಮನೆಗಳು ನಾಶವಾದವು. ನೈಋತ್ಯ ಪಂಜಾಬಿನ ಈ ಪ್ರದೇಶವು ದಕ್ಷಿಣದಲ್ಲಿ ರಾಜಸ್ಥಾನ ಮತ್ತು ಪೂರ್ವದಲ್ಲಿ ಹರಿಯಾಣದೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಬಲ್ಜಿಂದರ್ ಅವರು ಅಂದು ಮೂರು ದಿನಗಳ ಕಾಲ ಸುರಿದ ಆಲಿಕಲ್ಲು ಮಳೆಯ ಸಂತ್ರಸ್ಥ. ಕುಟುಂಬದ ಒಡೆತನದ ಐದು ಎಕರೆ ಜಮೀನಿನಲ್ಲಿ ಕೃಷಿ ಮಾಡುವುದರೊಂಧಿಗೆ ಅವರು 10 ಎಕರೆ ಕೃಷಿಭೂಮಿಯನ್ನು ಗೇಣಿಗೆ ಪಡೆದಿದ್ದು, ಇದರ ಸಲುವಾಗಿ ಅವರು ಆರ್ಥಿಯಾ (ಕೃಷಿ ಉತ್ಪನ್ನ ದಲ್ಲಾಳಿ) ಒಬ್ಬರಿಂದ 6.5 ಲಕ್ಷ ರೂ.ಗಳನ್ನು ಸಾಲವಾಗಿ ಪಡೆದಿದ್ದರು. ಅವರಿಗೆ ಅವರು ಬೆಳೆದಿದ್ದ ಗೋಧಿ ಬೆಳೆಯ ಹೊರತಾಗಿ ಬೇರೆ ಯಾವುದೇ ಆದಾಯ ಮೂಲವಿರಲಿಲ್ಲ. ಸಾಲ ತೀರಿಸುವುದಕ್ಕೂ ಇದೇ ಬೆಳೆಯನ್ನು ನಂಬಿದ್ದರು.
“ಇನ್ನೇನು ಕೈಗೆ ಬರಲಿದ್ದ ಫಸಲನ್ನು ಮೊದಲಿಗೆ ಬಿದ್ದ ಆಲಿಕಲ್ಲು ಹಾನಿ ಮಾಡಿತು. ಅದರ ನಂತರ ಬಿದ್ದ ಮಳೆಗೆ ಗದ್ದೆಯ ತುಂಬಾ ನೀರು ತುಂಬಿಕೊಂಡು ಗದ್ದೆಯಲ್ಲಿದ್ದ ಬೆಳೆ ಕೊಳೆಯಲಾರಂಭಿಸಿತು. ನೀರು ಹೊರ ಹೋಗಲು ಜಾಗವಿಲ್ಲದ ಕಾರಣ ಗದ್ದೆಯಲ್ಲೇ ಬೆಳೆ ಕೊಳೆಯಲಾರಂಭಿಸಿತು” ಎಂದರು ಬಲ್ಜಿಂದರ್. “ಇಂದು ಕೂಡಾ ಬೆಳೆ 15 ಎಕರೆ ಗದ್ದೆಯಲ್ಲಿ ಹಾಗೇ ಅಡ್ಡಡ್ಡ ಬಿದ್ದಿವೆ” ಎಂದು ಬಲ್ಜಿಂದರ್ ಎಪ್ರಿಲ್ ತಿಂಗಳ ಮಧ್ಯದಲ್ಲಿ ತಿಳಿಸಿದರು.


















