“ಬಿಲೊಶಿಗೆ ಹೋಗಬಯಸಿರುವ ನಾವು, ನಸುಕಿನ 5 ಗಂಟೆಯಿಂದಲೇ ಕಾಲ್ನಡಿಗೆಯಲ್ಲಿ ಹೊರಟಿದ್ದೇವೆ. ಯಾವುದೇ ವಾಹನಗಳು ಲಭ್ಯವಿಲ್ಲ. ನಮ್ಮ ಶೇಟ್ (ಉದ್ಯೋಗದಾತ) ನಮ್ಮಿಬ್ಬರಿಗೂ ಒಂದು ಸಾವಿರ ರೂ.ಗಳನ್ನು ನೀಡಿದ್ದಾರೆ. ಅದರಿಂದ, ಉಪ್ಪು ಹಾಗೂ ಮಸಾಲೆ, ದಿನಸಿ ಪದಾರ್ಥಗಳನ್ನು ಖರೀದಿಸಿದ್ದೇವೆ. ನಾವು ಮನೆಯನ್ನು ತಲುಪಲು ಸಾಧ್ಯವಾಗದಿದ್ದಲ್ಲಿ, ತಿನ್ನುವುದಾದರೂ ಏನನ್ನು? “ನೀವೆಲ್ಲರೂ ಈಗ ವಾಪಸ್ಸು ಬರದಿದ್ದಲ್ಲಿ, ಎರಡು ವರ್ಷಗಳು ಹೊರಗೇ ಇರಬೇಕಾಗುತ್ತದೆ” ಎಂಬುದಾಗಿ ನಮ್ಮ ಹಳ್ಳಿಯಿಂದ ದೂರವಾಣಿ ಕರೆ ಬಂದಿದೆ.”
ಜನರೂ ಸಹ ಇದನ್ನೇ ಹೇಳುತ್ತಿದ್ದರು. ತಲೆಯ ಮೇಲೆ ಸಾಮಾನು ಸರಂಜಾಮುಗಳನ್ನು, ಭುಜದಲ್ಲಿ ಮಕ್ಕಳನ್ನು ಹೊತ್ತು ಉರಿ ಬಿಸಿಲಿನಲ್ಲಿ ಅವರು ನಡೆಯುತ್ತಿದ್ದರು. ನನ್ನ ಹಳ್ಳಿಯಿಂದ ಸಾಗುತ್ತಿದ್ದ ಅವರನ್ನು ನೋಡಿದ ನಾನು, ಈ ಬಗ್ಗೆ ವಿಚಾರಿಸಿದೆ. ಪಾಲ್ಘರ್ ಜಿಲ್ಲೆಯ ವಡ ಕ್ಷೇತ್ರದ ಬಿಲೊಶಿ ಹಳ್ಳಿಗೆ ಸೇರಿದ ಇವರು, ಇಟ್ಟಿಗೆ ಗೂಡುಗಳಲ್ಲಿ ಕೆಲಸವನ್ನು ನಿರ್ವಹಿಸಲು ವಸೈ ಕ್ಷೇತ್ರದ ಭತನೆ ಹಳ್ಳಿಗೆ ವಲಸೆ ಬಂದಿದ್ದಾರೆ. ಮಕ್ಕಳು, ಹೆಂಗಸರು, ಗಂಡಸರಾದಿಯಾಗಿ ಒಟ್ಟು 18 ಜನರಿದ್ದರು. ಎಲ್ಲರೂ ಕಟ್ಕರಿ ಸಮುದಾಯದ ಆದಿವಾಸಿಗಳು.
ಅವರು ಕೊರೊನಾ ವೈರಸ್ ಬಗ್ಗೆ ಚಿಂತಿತರಾಗಿದ್ದರು. ಲಾಕ್ಡೌನ್ನಿಂದಾಗಿ, ಅವರನ್ನು ಮನೆಗೆ ಕರೆದೊಯ್ಯುವ ವಾಹನಗಳಾವುವೂ ಲಭ್ಯವಿರಲಿಲ್ಲ. ತಕ್ಷಣವೇ ಮನೆಗೆ ವಾಪಸ್ಸಾಗುವಂತೆ ತಮ್ಮ ಹಳ್ಳಿಯಿಂದ ಅವರಿಗೆ ಕಟ್ಟುನಿಟ್ಟಿನ ಸೂಚನೆಯು ತಲುಪಿತ್ತು. ಹೀಗಾಗಿ, ಅವರೆಲ್ಲರೂ ಕಾಲ್ನಡಿಗೆಯಲ್ಲೇ ಹೊರಟಿದ್ದರು. ಮಾರ್ಚ್ 29ರಂದು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಅವರು ನನ್ನ ಹಳ್ಳಿಯಾದ ನಿಂಬಾವಳಿಗೆ ತಲುಪಿದ್ದರು.
45ರ ವಯಸ್ಸಿನ ಕವಿತ ದಿವ, ತಮ್ಮ ಮಂಡಿಯನ್ನು ತೋರಿಸುತ್ತಾ, “ಸೂರ್ಯನ ಬಿಸಿಲು ಪ್ರಖರವಾಗಿತ್ತು. ತಲೆಯ ಮೇಲೆ ಸಾಮಾನುಗಳನ್ನು ಹೊತ್ತು ನಡೆಯುತ್ತಿದ್ದ ನಾನು, ಕೆಳಗೆ ಬಿದ್ದ ಕಾರಣ, ಗಾಯಗೊಂಡೆ,” ಎಂದರು. ಆಕೆಯ ಪಕ್ಕದಲ್ಲಿ 20ರ ವಯಸ್ಸಿನ ಸ್ವಪ್ನ ವಾಘ್ ಕುಳಿತಿದ್ದರು. ಆಕೆಯು 60 ತಿಂಗಳ ಗರ್ಭಿಣಿ. ಮದುವೆಯಾದಾಗಿನಿಂದಲೂ ಆಕೆ ತನ್ನ ಪತಿ, 23 ವರ್ಷದ ಕಿರಣ್ ವಾಘ್ ಅವರೊಂದಿಗೆ ಇಟ್ಟಿಗೆ ಗೂಡುಗಳಲ್ಲಿ ಕೆಲಸಮಾಡುತ್ತಿದ್ದಾರೆ. ಲಾಕ್ಡೌನ್ನಿಂದಾಗಿ, ಈಕೆಯೂ ಸಹ ತಲೆಯ ಮೇಲೆ ಸಾಮಾನು ಸರಂಜಾಮುಗಳನ್ನು, ಗರ್ಭದಲ್ಲಿ ಜೀವವೊಂದನ್ನು ಹೊತ್ತು ಮನೆಗೆ ತೆರಳುತ್ತಿದ್ದಾರೆ.



