ಕೋವಿಡ್-19 ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಹರಿಯಾಣದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ಊರು ಮಹಾರಾಜ್ಗಂಜ್ಗೆ ಒಬ್ಬಂಟಿಯಾಗಿ ತಾವು ಹೇಗೆ ಪ್ರಯಾಣಿಸಬೇಕಾಯ್ತು ಎಂಬುದನ್ನು ಸುನೀತಾ ನಿಶಾದ್ ನೆನಪಿಸಿಕೊಳ್ಳುತ್ತಾರೆ.
ಇಡೀ ದೇಶದಲ್ಲಿ ದಿಢೀರನೇ ಲಾಕ್ಡೌನ್ ಘೋಷಣೆಯಾದಾಗ ಆ ಸಂಕಷ್ಟವನ್ನು ಎದುರಿಸಿದ ಲಕ್ಷಾಂತರ ವಲಸೆ ಕಾರ್ಮಿಕರಲ್ಲಿ ಸುನೀತಾ ಕೂಡ ಒಬ್ಬರು. ಹಾಗಾಗಿ ಕೇಂದ್ರದ ಬಜೆಟ್ ಇರಲಿ ಅಥವಾ ಸರ್ಕಾರ ಘೋಷಿಸುವ ಹೊಸ ಯೋಜನೆಗಳಿರಲಿ, ಇವರಿಗೆ ಅವುಗಳ ಬಗ್ಗೆ ಯಾವುದೇ ಆಸಕ್ತಿ ಇಲ್ಲ.
"ನೀವು ಬಜೆಟ್ ಬಗ್ಗೆ ನನ್ನನ್ನು ಕೇಳುತ್ತಿದ್ದೀರಿ. ಇದರ ಬದಲು ಕೊರೋನಾ (ಕೋವಿಡ್-19 ಸಾಂಕ್ರಾಮಿಕ) ಸಮಯದಲ್ಲಿ ನಮ್ಮನ್ನು ನಮ್ಮ ಮನೆಗೆ ಕಳುಹಿಸಲು ಅವರಲ್ಲಿ ಹಣ ಯಾಕಿರಲಿಲ್ಲ ಅಂತ ನೀವು ಹೋಗಿ ಸರ್ಕಾರವನ್ನು ಕೇಳಿ," ಎಂದು ಅವರು ಈ ವರದಿಗಾರರನ್ನು ಕೇಳುತ್ತಾರೆ.
ಸದ್ಯ 35 ವರ್ಷ ಪ್ರಾಯದ ಈ ಮಹಿಳೆ ಹರಿಯಾಣಕ್ಕೆ ವಾಪಾಸ್ ಬಂದು ರೋಹ್ಟಕ್ನ ಲಾಧೋಟ್ ಗ್ರಾಮದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಂಗಡಿಸುವ ಕೆಲಸ ಮಾಡುತ್ತಿದ್ದಾರೆ. "ಮಜ್ಬೂರ್ ಹೂ [ಅಸಹಾಯಕಳಾಗಿದ್ದೇನೆ]. ಅದಕ್ಕಾಗಿ ನಾನು ಇಲ್ಲಿಗೆ ಮರಳಿ ಬರಬೇಕಾಯ್ತು," ಎಂದು ಅವರು ಹೇಳುತ್ತಾರೆ.
ಮರುಬಳಕೆಗಾಗಿ ಸುಗಂಧ ದ್ರವ್ಯದ ಡಬ್ಬಿಗಳನ್ನು ತೂತು ಮಾಡುತ್ತಾ, "ಮೇರೆ ಪಾಸ್ ಬಡಾ ಮೊಬೈಲ್ ನಹೀಂ ಹೈ, ಚೋಟಾ ಮೊಬೈಲ್ ಹೈ [ನನ್ನ ಬಳಿ ದೊಡ್ಡ ಮೊಬೈಲ್ ಇಲ್ಲ, ಸಣ್ಣದೊಂದಿದೆ]. ಬಜೆಟ್ ಅಂದ್ರೆ ಏನು ಅಂತ ನಂಗೆ ಹೇಗೆ ಗೊತ್ತಾಗಬೇಕು?" ಎಂದು ಅವರು ಕೇಳುತ್ತಾರೆ. ಡಿಜಿಟಲೀಕರಣ ಹೆಚ್ಚಿದಂತೆ ಸರ್ಕಾರಿ ಯೋಜನೆಗಳು ಜನರಿಗೆ ಸಿಗಬೇಕಾದರೆ ಸ್ಮಾರ್ಟ್ಫೋನ್ ಮತ್ತು ಇಂಟರ್ನೆಟ್ ಸಂಪರ್ಕ ಹೊಂದಿರುವುದು ಅಗತ್ಯ. ಆದರೆ ಗ್ರಾಮೀಣ ಭಾರತದಲ್ಲಿ ಅನೇಕರಲ್ಲಿ ಇನ್ನೂ ಅಂತಹ ಸೌಲಭ್ಯಗಳಿಲ್ಲ.





