“ಸಾತ್ ಬಾರಾಹ್ ಇಲ್ಲದೆ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ” ಇದು 55- ವರ್ಷದ ಶಶಿಕಲಾ ಗಾಯಕ್ವಾಡ್ ಅವರ ಮಾತು. ಅವರು ರೈತ ಹೋರಾಟ ನಡೆಯುತ್ತಿದ್ದ ದಕ್ಷಿಣ ಮುಂಬೈನ ಆಝಾದ್ ಮೈದಾನದಲ್ಲಿ ಕುಳಿತು ನಮ್ಮೊಂದಿಗೆ ಮಾತನಾಡುತ್ತಿದ್ದರು.
ಅವರ ಪಕ್ಕದಲ್ಲಿ ಕಿತ್ತಳೆ ಮತ್ತು ಕೆಂಪು ಬಣ್ಣದ ರಗ್ಗು ಹಾಸಿದ ನೆಲದ ಮೇಲೆ 65 ವರ್ಷದ ಅರುಣಬಾಯಿ ಸೊನಾವಣೆ ಕುಳಿತಿದ್ದರು. ಜನವರಿ 25-26ರಂದು ಶೆತ್ಕರಿ ಕಾಮಗಾರ್ ಮೋರ್ಚಾ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲೆಂದು ಇಬ್ಬರೂ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಚಿಮನಾಪುರ ಗ್ರಾಮದಿಂದ ಮುಂಬೈಗೆ ಬಂದಿದ್ದರು.
2006ರ ಅರಣ್ಯ ಹಕ್ಕುಗಳ ಕಾಯ್ದೆಯಡಿ ತಮಗೆ ಭೂಮಿಯ ಹಕ್ಕನ್ನು ನೀಡಬೇಕು ಮತ್ತು ಮೂರು ಹೊಸ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಹೋರಾಟ ಮಾಡಲು ಇಬ್ಬರೂ ಇಲ್ಲಿ ಸೇರಿದ್ದರು. ಭಿಲ್ ಆದಿವಾಸಿ ಸಮುದಾಯಕ್ಕೆ ಸೇರಿದವರಾದ ಅರುಣಬಾಯಿ ಮತ್ತು ಶಶಿಕಲಾ ಕನ್ನಡ್ ತಾಲೂಕಿನಲ್ಲಿರುವ ಅವರ ಗ್ರಾಮದಲ್ಲಿ, ಕೃಷಿ ಕೂಲಿಯೇ ಅವರ ಜೀವನೋಪಾಯದ ಮೂಲವಾಗಿದೆ. ಕೆಲಸಗಳು ಲಭ್ಯವಿರುವ ದಿನಗಳಲ್ಲಿ 150-200 ರೂ. ದಿನಗೂಲಿ ಸಂಪಾದಿಸುತ್ತಾರೆ. "ನಮಗೆ ನಿಮ್ಮಂತೆ ತಿಂಗಳಿಗೆ ಇಷ್ಟೇ ಸಂಪಾದನೆಯಾಗುತ್ತದೆಯೆಂದು ಹೇಳಲು ಸಾಧ್ಯವಿಲ್ಲ" ಎಂದು ಅರುಣಬಾಯಿ ನನ್ನೊಂದಿಗೆ ಹೇಳಿದರು.
ಇಬ್ಬರೂ ತಮ್ಮ ಮೂರು ಎಕರೆ ಜಾಗದಲ್ಲಿ ಜೋಳ ಮತ್ತು ಜೋವರ್ (ಹುಲ್ಲುಜೋಳ) ಬೆಳೆಯುತ್ತಾರೆ. ಅವರು ಬೆಳೆಯುವ 10-12 ಕ್ವಿಂಟಾಲ್ ಜೋಳವನ್ನು ಕ್ವಿಂಟಾಲ್ಗೆ 1000ದಂತೆ ಮಾರುತ್ತಾರೆ. ಜೋವರ್ ಅನ್ನು ತಮ್ಮ ಕುಟುಂಬದ ಬಳಕೆಗಾಗಿ ಇಟ್ಟುಕೊಳ್ಳುತ್ತಾರೆ. ಹೊಲಗಳಿಗೆ ಬೇಲಿಯಿದ್ದರೂ ಕಾಡುಹಂದಿಗಳು, ನೀಲಗಾಯ್ಗಳು ಮತ್ತು ಕೋತಿಗಳು ಹೊಲದೊಳಗೆ ನುಗ್ಗಿ ಬೆಳೆ ನಾಶ ಮಾಡುತ್ತವೆ. "ಹೊಲ ಇರುವವರು ರಾತ್ರಿಯಿಡೀ [ಬೆಳೆಗಳನ್ನು ಕಾಪಾಡಲು] ಎದ್ದಿರಲೇಬೇಕು" ಎಂದು ಅರುಣಬಾಯಿ ಹೇಳುತ್ತಾರೆ.
ಶಶಿಕಲಾ ಮತ್ತು ಅರುಣಬಾಯಿ ಬೇಸಾಯ ಮಾಡುವ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು. "ಸಾತ್ ಬಾರಾಹ್ (ಏಳು ಹನ್ನೆರಡು) [ಭೂಮಿಯ ಮಾಲೀಕತ್ವದ ದಾಖಲೆ] ಇಲ್ಲದೆ ನಾವು [ಕೃಷಿ ಸಂಬಂಧಿ] ಯಾವುದೇ ಸೌಲಭ್ಯವನ್ನು ಪಡೆಯಲು ಸಾಧ್ಯವಿಲ್ಲ" ಎಂದು ಶಶಿಕಲಾ ಹೇಳಿದರು. “ಅರಣ್ಯ ಇಲಾಖೆಯ ಜನರು ಕೂಡ ನಮಗೆ ಕಿರುಕುಳ ನೀಡುತ್ತಲೇ ಇರುತ್ತಾರೆ. ಅವರು ನಮಗೆ ಇಲ್ಲಿ ಕೃಷಿ ಮಾಡಬೇಡಿ, ಅಲ್ಲಿ ನಿಮ್ಮ ಮನೆಯನ್ನು ನಿರ್ಮಿಸಬೇಡಿ, ನೀವು ಟ್ರ್ಯಾಕ್ಟರ್ ತಂದರೆ ನಾವು ನಿಮ್ಮ ಮೇಲೆ ದಂಡ ವಿಧಿಸುತ್ತೇವೆ ಎಂದು ಹೆದರಿಸುತ್ತಾರೆ."
ದೆಹಲಿ ಗಡಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲವಾಗಿ ಶಶಿಕಲಾ ಮತ್ತು ಅರುಣಾ ಬಾಯಿ ಆಝಾದ್ ಮೈದಾನಕ್ಕೆ ಬಂದಿದ್ದಾರೆ. ರೈತರು ವಿರೋಧಿಸುತ್ತಿರುವ ಕಾನೂನುಗಳೆಂದರೆ: ರೈತ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ, 2020; ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ 2020ರ ಒಪ್ಪಂದ ಮಸೂದೆ; ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ, 2020. ಈ ಕೃಷಿ ಕಾನೂನುಗಳನ್ನು ಮೊದಲು ಜೂನ್ 5, 2020 ರಂದು ಸುಗ್ರೀವಾಜ್ಞೆಗಳಾಗಿ ಅಂಗೀಕರಿಸಲಾಯಿತು, ನಂತರ ಸೆಪ್ಟೆಂಬರ್ 14 ರಂದು ಸಂಸತ್ತಿನಲ್ಲಿ ಕೃಷಿ ಮಸೂದೆಗಳಾಗಿ ಪರಿಚಯಿಸಲಾಯಿತು ಮತ್ತು ಆ ತಿಂಗಳ 20 ರ ಹೊತ್ತಿಗೆ ಕಾಯಿದೆಗಳನ್ನಾಗಿ ಪರಿಚಯಿಸಲಾಯಿತು.


