"ನೀವು ಬೆಳಕಿನಲ್ಲಿ ಹುಟ್ಟಿದ್ದೀರಿ, ನಾವು ಕತ್ತಲೆಯಲ್ಲಿ ಹುಟ್ಟಿದ್ದೇವೆ," ಎಂದು ನಂದ್ರಾಮ್ ಜಮುಂಕರ್ ತಮ್ಮ ಮಣ್ಣಿನ ಮನೆಯ ಹೊರಗಡೆ ಕುಳಿತುಕೊಂಡು ಹೇಳುತ್ತಾರೆ. ನಾವು ಏಪ್ರಿಲ್ 26, 2024 ರಂದು ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯಲಿರುವ ಅಮರಾವತಿ ಜಿಲ್ಲೆಯ ಖಡಿಮಲ್ ಹಳ್ಳಿಯಲ್ಲಿದ್ದೇವೆ. ನಂದ್ರಾಮ್ ಮಾತನಾಡುತ್ತಿರುವುದು ಅಕ್ಷರಶಃ ಕಗ್ಗತ್ತಲ ಬಗ್ಗೆ; ಮಹಾರಾಷ್ಟ್ರದ ಬುಡಕಟ್ಟು ಈ ಹಳ್ಳಿಗೆ ಇದುವರೆಗೆ ವಿದ್ಯುತ್ತೇ ಸಿಕ್ಕಿಲ್ಲ.
“ಪ್ರತಿ ಐದು ವರ್ಷಕ್ಕೊಮ್ಮೆ ಯಾರಾದರೂ ಬಂದು ವಿದ್ಯುತ್ ಕೊಡುವುದಾಗಿ ಭರವಸೆ ನೀಡುತ್ತಾರೆ. ವಿದ್ಯುತ್ ಬಿಡಿ, ಅವರೇ ಆಮೇಲೆ ಈ ಕಡೆ ಬರುವುದಿಲ್ಲ,” ಎಂದು 48 ವರ್ಷ ವಯಸ್ಸಿನ ಇವರು ಹೇಳುತ್ತಾರೆ. 2019ರಲ್ಲಿ ಶಿವಸೇನಾ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಆನಂದರಾವ್ ಅಡ್ಸುಲ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಸೋಲಿಸಿ ಹಾಲಿ ಸಂಸದೆ ನವನೀತ್ ಕೌರ್ ರಾಣಾ ಅಧಿಕಾರಕ್ಕೆ ಬಂದಿದ್ದರು. ಈ ಬಾರಿ ಅವರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
198 ಕುಟುಂಬಗಳಿರುವ (ಜನಗಣತಿ 2011) ಚಿಖಲ್ದಾರ ತಾಲೂಕಿನ ಈ ಗ್ರಾಮದ ಜನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ)ಯನ್ನು ಅವಲಂಬಿಸಿದ್ದಾರೆ ಮತ್ತು ಕೆಲವರಿಗೆ ಜಮೀನಿದೆ. ಜಮೀನು ಇರುವವರು ಮಳೆಯಾಶ್ರಿತ ಕೃಷಿಯನ್ನು ಮಾಡುತ್ತಾರೆ, ಹೆಚ್ಚಾಗಿ ಜೋಳವನ್ನು ಬೆಳೆಯುತ್ತಾರೆ. ಖಡಿಮಲ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಪಂಗಡಗಳು (ಎಸ್ಟಿ) ಇವೆ, ಅವರು ಯಾವಾಗಲೂ ನೀರು ಮತ್ತು ವಿದ್ಯುತ್ ಇಲ್ಲದೆ ಬದುಕುತ್ತಿದ್ದಾರೆ. ನಂದ್ರಾಮ್ ಅವರು 2019 ರಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಅಳಿವಿನಂಚಿನಲ್ಲಿರುವ ಭಾಷೆ ಎಂದು ಗುರುತಿಸಿರುವ ಕೊರ್ಕು ಮಾತನಾಡುವ ಕೊರ್ಕು ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ.








